Olle lekhana sir

Shivakumar C <[email protected]> wrote:

>ಕರ್ನಾಟಕ ಏಕೀಕರಣ
>ಕನ್ನಡ ರಾಜ್ಯೋತ್ಸವ ನಾಡಹಬ್ಬದ ಈ ಶುಭದಿನದಂದು ಪ್ರಪಂಚದಾದ್ಯಂತ ನೆಲೆಸಿರುವ ಸಮಸ್ತ 
>ಕನ್ನಡಿಗರಿಗೆ ಹೃದಯಪೂರ್ವಕ ಶುಭಕಾಮನೆಗಳು. ಕಹಳೆ ಕಾರ್ಯಕ್ರಮದ ನಾಲ್ಕನೇ ಆವೃತ್ತಿಗೆ 
>ಕನ್ನಡಿಗರೆಲ್ಲರಿಂದ ದೊರೆಯುತ್ತಿರುವ ಅಭೂತಪೂರ್ವ ಪ್ರೋತ್ಸಾಹ ಹಾಗೂ ಬೆಂಬಲಕ್ಕೆ ನಾವು ಋಣಿಗಳು. 
>ಈ ಕಾರ್ಯಕ್ರಮದ ಯಶಸ್ಸು ಹೀಗೆಯೇ ಮುಂದುವರೆಯಲು ನಿಮ್ಮೆಲ್ಲರ ನಿರಂತರ ಆಶೀರ್ವಾದಪೂರ್ವಕ ಸಹಕಾರ 
>ಅತೀ ಅವಶ್ಯಕ; ನೀವೆಲ್ಲರೂ ಸದಾ ಕಹಳೆಯೊಟ್ಟಿಗೆ ಇರುತ್ತೀರೆಂದು ನಂಬಿದ್ದೇವೆ. ನವಂಬರ್ 2014 ರ 
>ಮಾಹೆಯುದ್ದಕ್ಕೂ ನಡೆಯಲಿರುವ ಈ ಕಾರ್ಯಕ್ರಮವು ನಿರ್ವಿಘ್ನವಾಗಿ ನೆರವೇರುವಂತಾಗಲಿ ಎಂದು 
>ದೈವೀಸಂಭೂತರಾದ ಗುರುಗಳ ಪಾದಾರವಿಂದಗಳಿಗೆ ನಮಿಸಿ, ಶ್ರೀ ಚಾಮರಾಜ ಸವಡಿ ಇವರಿಂದ ರಚಿತಗೊಂಡಿರುವ 
>ಲೇಖನವನ್ನು ಪ್ರಕಟಿಸುತ್ತಾ, ಕಹಳೆಯ ನಾಲ್ಕನೇ ಆವೃತ್ತಿಯನ್ನು ಸಮಸ್ತ ಕನ್ನಡಿಗರ ಪರವಾಗಿ 
>ಕನ್ನಡಾಂಬೆಗೆ ಶ್ರದ್ಧಾಪೂರ್ವಕವಾಗಿ ಅರ್ಪಿಸುತ್ತಿದ್ದೇವೆ.
>=> ಕಹಳೆ ತಂಡ.
>
>ಮೈಸೂರು ಕರ್ನಾಟಕವಾದ ಕಥೆ
>ಇವತ್ತು ಯಾವುದನ್ನು ನಾವು ವಿಶಾಲ ಕರ್ನಾಟಕ, ಅಖಂಡ ಕರ್ನಾಟಕ ಎಂದು ಕರೆಯುತ್ತೇವೆಯೋ ಅದು ಆರು 
>ದಶಕಗಳ ಹಿಂದೆ ಸುಮಾರು 20 ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿತ್ತು. ಕನ್ನಡಿಗರ ಒಂದು 
>ಪ್ರತ್ಯೇಕ ರಾಜ್ಯವೆಂಬುದು ಅಸ್ತಿತ್ವದಲ್ಲೇ ಇರಲಿಲ್ಲ ಎಂದರೆ ಅಚ್ಚರಿಯಾಗುತ್ತಿದೆಯೇ? ಸ್ವಂತ 
>ರಾಜ್ಯ ಹೊಂದುವ ಕನಸು ಮೊಳೆತು, ಚಿಗುರಿ, ಹಬ್ಬಿ, ಹೂವಾಗಿ, ಕಾಯಾಗಿ, ಹಣ್ಣಾದ ಘಟನೆಗಳ ಹಿಂದಿನ 
>ಸಂಕ್ಷಿಪ್ತ ಚಿತ್ರಣ ಇಲ್ಲಿದೆ:
>
>ಅದೊಂದು ಸಮೃದ್ಧ ಕನಸು
>ಕನ್ನಡ ಮಾತನಾಡುವ ಜನರೆಲ್ಲ ಒಂದೇ ಪ್ರದೇಶಕ್ಕೆ ಸೇರಬೇಕೆಂಬ ಕನಸು ಮೊಳೆತಾಗ ಇದು ನಮ್ಮ ನೆಲ 
>ಎಂದು ಹೇಳಿಕೊಳ್ಳಲು ಮೈಸೂರು ಸಂಸ್ಥಾನ ಹೊರತುಪಡಿಸಿ ಬೇರೆ ನಿರ್ದಿಷ್ಟ ಪ್ರದೇಶವೇ ಇದ್ದಿಲ್ಲ. 
>ಉಳಿದ ಪ್ರಾಂತ್ಯಗಳ ಆಡಳಿತದಲ್ಲಿ ಕನ್ನಡ, ಕನ್ನಡಿಗರಿಗೆ ಪ್ರಾಧಾನ್ಯತೆ ಇರಲಿಲ್ಲ.
>
>ಈ ಸಂದರ್ಭದಲ್ಲಿ ಕನ್ನಡದ ಪರವಾಗಿ ಕೆಲಸ ಮಾಡಿದ ಕೆಲ ಮಹನೀಯರನ್ನು ನೆನೆಯಲೇಬೇಕು. ಸರ್ ವಾಲ್ಟರ್ 
>ಎಲಿಯಟ್, ಸರ್ ಥಾಮಸ್ ಮನ್ರೋ, ಜಾನ್ ಎ. ಡನ್‌ಲಪ್, ಗ್ರೀನ್ ಹಿಲ್ ಆರ್. ಗ್ರಾಂಟ್, ಡಬ್ಲ್ಯು. 
>ಎ. ರಸೆಲ್, ಜೆ. ಎಫ್. ಫ್ಲೀಟ್‌ರಂತಹ ಬ್ರಿಟಿಷ್ ಅಧಿಕಾರಿಗಳು ಕನ್ನಡ ಕಟ್ಟುವ ಕೆಲಸ ಮಾಡಿದರು. 
>ಅವರಿಗೆ ಕೈ ಜೋಡಿಸಿದ್ದು ಚೆನ್ನಬಸಪ್ಪನವರಂತಹ ಕನ್ನಡಿಗ ಅಧಿಕಾರಿ. ಜೊತೆಗೆ, ರಾ. ಹ. 
>ದೇಶಪಾಂಡೆ, ರೊದ್ದ ಶ್ರೀನಿವಾಸರಾವ್, ಆಲೂರು ವೆಂಕಟರಾವ್ ಮುಂತಾದ ಹಿರಿಯರು ಕನ್ನಡ ಮಾತನಾಡುವ 
>ಜನರೆಲ್ಲರನ್ನೂ ಹೊಂದಿರುವ ಒಂದು ಪ್ರಾಂತ್ಯ ರಚನೆಯಾಗಬೇಕೆಂದು ಕನಸು ಕಂಡರು. 
>
>ಕರ್ನಾಟಕ ಏಕೀಕರಣದ ಕನಸು ಮೊಳೆತಿದ್ದು ಹೀಗೆ. ಜೊತೆಗೆ, ಇಂಥದೊಂದು ಕನಸು ಮೊಳೆಯಲು ಕೆಲ 
>ಐತಿಹಾಸಿಕ ಘಟನೆಗಳೂ ಕಾರಣವಾಗಿವೆ.
>
>1905ರಲ್ಲಿ ಬ್ರಿಟಿಷ್ ಸರ್ಕಾರ ಪ್ರಸ್ತಾಪಿಸಿದ್ದ ಬಂಗಾಳ ರಾಜ್ಯದ ವಿಭಜನೆ. ಇದನ್ನು 
>ಪ್ರತಿಭಟಿಸಿದ ಬಂಗಾಳಿಗಳು 'ವಂಗಭಂಗ' ಎಂದು ದೊಡ್ಡ ಚಳವಳಿಯನ್ನೇ ರೂಪಿಸಿದರು. ಹೋರಾಟ 
>ತೀವ್ರಗೊಂಡಾಗ, ಮಣಿದ ಬ್ರಿಟಿಷ್ ಸರ್ಕಾರ 1912ರಲ್ಲಿ ಬಂಗಾಳವನ್ನು ಪುನಃ ಒಂದು ಮಾಡಿತು. 
>ಕನ್ನಡಿಗರನ್ನು ಒಂದೆಡೆ ಸೇರಿಸುವ ಕನಸು ಹೊತ್ತಿದ್ದವರಿಗೆ ಈ ಘಟನೆ ದೊಡ್ಡ ಪ್ರೇರಣೆಯಾಯಿತು. 
>
>ಕರ್ನಾಟಕ ವಿದ್ಯಾವರ್ಧಕ ಸಂಘ
>ಕರ್ನಾಟಕ ರೂಪುಗೊಳ್ಳಲು ಕಾರಣರಾದವರ ಪೈಕಿ ಒಬ್ಬರಾದ ರಾ. ಹ. ದೇಶಪಾಂಡೆ ಹಾಗೂ ಕೆಲವು ಸಮಾನ 
>ಮನಸ್ಕರು ಒಂದೆಡೆ ಸೇರಿದರು. ಕನ್ನಡ ಭಾಷೆಯ ದುಃಸ್ಥಿತಿ ದೂರ ಮಾಡಲೆಂದು 1890ರಲ್ಲೇ ಕರ್ನಾಟಕ 
>ವಿದ್ಯಾವರ್ಧಕ ಸಂಘವನ್ನು ಧಾರವಾಡದಲ್ಲಿ ಸ್ಥಾಪಿಸಿದ್ದರು. ಕನ್ನಡದಲ್ಲಿ ಶಿಕ್ಷಣ ಪ್ರಸಾರಕ್ಕೆ 
>ಪ್ರೋತ್ಸಾಹ, ಪ್ರಾಚೀನ ಕನ್ನಡ ಕೃತಿಗಳ ಸಂಪಾದನೆ ಮತ್ತು ಪ್ರಕಟಣೆ, ಕನ್ನಡದಲ್ಲಿ ಸ್ವತಂತ್ರ 
>ಕೃತಿಗಳ ರಚನೆ, ಉತ್ತಮ ಮತ್ತು ಉಪಯುಕ್ತ ಕೃತಿಗಳ ಅನುವಾದ ಹಾಗೂ ಪ್ರಕಟಣೆಗೆ ಪ್ರೋತ್ಸಾಹ, ಗ್ರಂಥ 
>ಭಂಡಾರಗಳ ಸ್ಥಾಪನೆ ಮತ್ತು ನಿರ್ವಹಣೆಗೆ ನೆರವು ನೀಡುವುದು ಈ ಸಂಸ್ಥೆಯ ಮೂಲ ಉದ್ದೇಶವಾಗಿತ್ತು. 
>ಲೇಖಕರನ್ನು ಬೆಳೆಸಿದ ಸಂಘ, ಕನ್ನಡ ಗ್ರಂಥಗಳ ಭಾಷೆಯಲ್ಲಿ ಏಕರೂಪತೆ ಇರಬೇಕೆಂಬ ಕಾರಣದಿಂದ 1907ರ 
>ಜೂನ್ ತಿಂಗಳ ಮೊದಲ ವಾರದಲ್ಲಿ ಧಾರವಾಡದಲ್ಲಿ ಅಖಿಲ ಕರ್ನಾಟಕ ಗ್ರಂಥಕರ್ತರ ಮೊದಲ ಸಮ್ಮೇಳನವನ್ನು 
>ಯಶಸ್ವಿಯಾಗಿ ನಡೆಸಿತು.
>
>ಕನ್ನಡ ಸಾಹಿತ್ಯ ಪರಿಷತ್ತು
>ನಂತರದ ಸಮ್ಮೇಳನವನ್ನು ಬೆಂಗಳೂರಿನಲ್ಲಿ ನಡೆಸಬೇಕು ಎಂಬ ಪ್ರಯತ್ನದ ಫಲವಾಗಿ 1915ರಲ್ಲಿ 
>ಸ್ಥಾಪನೆಯಾದದ್ದು ಕರ್ನಾಟಕ ಸಾಹಿತ್ಯ ಪರಿಷತ್ತು. ಮುಂದೆ ಇದು ಕನ್ನಡ ಸಾಹಿತ್ಯ ಪರಿಷತ್ತು ಎಂದು 
>ಹೆಸರು ಬದಲಾಯಿಸಿಕೊಂಡಿತು. ಸಾಹಿತ್ಯ ಸಮ್ಮೇಳನಗಳ ಸಂದರ್ಭದಲ್ಲಿ ಕರ್ನಾಟಕ ಏಕೀಕರಣದ ಪರವಾಗಿ 
>ದನಿ ಎತ್ತುವ ಮೂಲಕ ಏಕೀಕರಣದ ಬೇಡಿಕೆಗೆ ಪರಿಷತ್ತು ವೇದಿಕೆ ಕಲ್ಪಿಸಿತು. 
>
>ಕರ್ನಾಟಕ ಕುಲ ಪುರೋಹಿತ
>ಎಲ್ಲರಿಗಿಂತ ಪ್ರಮುಖ ಸ್ಥಾನದಲ್ಲಿ ನಿಲ್ಲುವ ವ್ಯಕ್ತಿ ಎಂದರೆ 'ಕರ್ನಾಟಕದ ಗತವೈಭವ' ಗ್ರಂಥ 
>ರಚಿಸಿದ ಕರ್ನಾಟಕ 'ಕುಲ ಪುರೋಹಿತ' ಆಲೂರು ವೆಂಕಟರಾಯರು. ಕರ್ನಾಟಕ ಏಕೀಕರಣದ ಬಗ್ಗೆ ಕನಸು 
>ಕಂಡಿದ್ದಲ್ಲದೇ ಅದರ ಸಾಕಾರಕ್ಕೆ ದುಡಿದ ಹಿರಿಯ ಜೀವ ಇದು. ಆಲೂರು ವೆಂಕಟರಾಯರು, ಗದಿಗೆಯ್ಯ 
>ಹೊನ್ನಾಪುರಮಠ ಮತ್ತು ಕಡಪಾ ರಾಘವೇಂದ್ರರಾಯರು ಸೇರಿ 1916ರಲ್ಲಿ ಸ್ಥಾಪಿಸಿದ 'ಕರ್ನಾಟಕ ಸಭೆ' 
>ಕರ್ನಾಟಕ ಏಕೀಕರಣದ ಬೇಡಿಕೆಗೆ ಇಂಬು ಕೊಟ್ಟಿತು. ರಾಜಕೀಯ ಬೆಂಬಲವನ್ನೂ ಪಡೆದಿದ್ದ ಕರ್ನಾಟಕ 
>ಸಭೆಯು ಏಕೀಕರಣದ ವಿಷಯದಲ್ಲಿ ಹಲವಾರು ಹೋರಾಟಗಳನ್ನು ನಡೆಸಿತು. ಇದರ ಪ್ರೇರಣೆಯಿಂದ ನಾಡಹಬ್ಬಗಳು 
>ನಡೆದವು. ಸಕ್ಕರಿ ಬಾಳಾಚಾರ್ಯ, ಡಾ. ಯು. ರಾಮರಾವ್, ಮುದವೀಡು ಕೃಷ್ಣರಾವ್, ಕಡಪಾ ರಾಘವೇಂದ್ರ 
>ರಾವ್, ಮಂಗಳವೇಡೆ ಶ್ರೀನಿವಾಸರಾವ್ ಮುಂತಾದ ಹಿರಿಯರು ಸಭೆಯ ಜೊತೆ ಗುರುತಿಸಿಕೊಂಡಿದ್ದರು.
>
>ಬ್ರಿಟಿಷರೂ ಬಯಸಿದ್ದರು
>1918ರಲ್ಲೇ ಭಾರತದಲ್ಲಿ ಭಾಷಾವಾರು ಪ್ರಾಂತ ರಚನೆಯ ಸಂಬಂಧ ಮಾಂಟೆಗ್ಯೂ-ಚೆಲ್ಮ್ಸ್‌ಫರ್ಡ್ ಸಮಿತಿ 
>ನೇಮಕಗೊಂಡಿತ್ತು. ಆ ಸಮಿತಿಯು ದೇಶವನ್ನು ಭಾಷಾವಾರು ಪ್ರಾಂತ್ಯಗಳನ್ನಾಗಿ ವಿಭಾಗಿಸುವುದು ಅಗತ್ಯ 
>ಎಂದು ಶಿಫಾರಸು ಮಾಡಿತು. ಇದನ್ನು ಆಗಿನ ಬ್ರಿಟಿಷ್ ಸರ್ಕಾರ ಕೂಡ ಒಪ್ಪಿಕೊಂಡಿತ್ತು. 1920ರಲ್ಲಿ 
>ಮಹಾರಾಷ್ಟ್ರದ ನಾಗಪುರದಲ್ಲಿ ನಡೆದ ಕಾಂಗ್ರೆಸ್ ಮಹಾಧಿವೇಶನ ಏಕೀಕರಣದ ನಿಟ್ಟಿನಲ್ಲಿ ಒಂದು 
>ಮಹತ್ವದ ವೇದಿಕೆ. ಕರ್ನಾಟಕ ಪ್ರತಿನಿಧಿಗಳ ಒತ್ತಡಕ್ಕೆ ಮಣಿದು, ಬ್ರಿಟಿಷ್ ಆಳ್ವಿಕೆಗೆ ಸೇರಿದ್ದ 
>ಕನ್ನಡ ಭಾಷಿಕ ಪ್ರದೇಶಗಳನ್ನು ಕರ್ನಾಟಕ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಗೆ ಸೇರಿಸಲಾಯಿತು. 
>
>ಏಕೀಕರಣಕ್ಕೆ ವೇದಿಕೆಯಾದ ಬೆಳಗಾವಿ ಅಧಿವೇಶನ
>ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ರಾಷ್ಟ್ರೀಯ 
>ಕಾಂಗ್ರೆಸ್‌ನ ಮಹಾಧಿವೇಶನದ ಸಂದರ್ಭದಲ್ಲಿ ಕರ್ನಾಟಕ ಏಕೀಕರಣಕ್ಕೆ ವಿಶೇಷ ಚಾಲನೆ ದೊರೆಯಿತು. 
>ಕರ್ನಾಟಕ ಸಭೆಯ ಮೊದಲ ಪರಿಷತ್ತು ಬೆಳಗಾವಿಯಲ್ಲಿ 25-12-1924ರಂದು, ಸರ್ ಸಿದ್ದಪ್ಪ ಕಂಬಳಿಯವರ 
>ಅಧ್ಯಕ್ಷತೆಯಲ್ಲಿ ನಡೆಯಿತು. ಆ ಸಂದರ್ಭದಲ್ಲಿ ಹುಯಿಲಗೋಳ ನಾರಾಯಣರಾಯರು ರಚಿಸಿದ 'ಉದಯವಾಗಲಿ 
>ನಮ್ಮ ಚೆಲುವ ಕನ್ನಡ ನಾಡು' ಗೀತೆಯನ್ನು ಮೊದಲ ಬಾರಿಗೆ ಹಾಡಲಾಯಿತು.
>
>ಮದ್ರಾಸ್ ಮತ್ತು ಮುಂಬಯಿ ಆಧಿಪತ್ಯದ ವಿಧಾನ ಸಭೆಗಳಲ್ಲೂ ಕರ್ನಾಟಕ ಏಕೀಕರಣದ ವಿಷಯ 
>ಪ್ರಸ್ತಾಪಿತಗೊಂಡಿತು. ಮದ್ರಾಸ್ ವಿಧಾನ ಸಭೆಯಲ್ಲಿ ಎ. ರಂಗನಾಥ ಮೊದಲಿಯಾರ್, ಜೆ. ಎ. ಸಲ್ಡಾನ, 
>ಎ. ಬಿ. ಶೆಟ್ಟಿ, ಡಾ. ನಾಗನಗೌಡ ಮುಂತಾದ ಸದಸ್ಯರು ಕರ್ನಾಟಕ ಏಕೀಕರಣವನ್ನು ಬೆಂಬಲಿಸಿದರೂ 
>ಸರ್ಕಾರ ಅದನ್ನು ತಿರಸ್ಕರಿಸಿತು. ಮುಂಬಯಿ ವಿಧಾನ ಸಭೆಯಲ್ಲಿ 1919ರಲ್ಲಿ ವಿ. ಎನ್. ಜೋಗ್ 
>ಕರ್ನಾಟಕ ಪ್ರಾಂತ ರಚನೆಗೆ ಕೋರಿ ಠರಾವು ಮಂಡಿಸಿದ್ದರು. ಆದರೆ, ಅದೂ ತಿರಸ್ಕೃತವಾಯಿತು. 
>1926ರಲ್ಲಿ ಸರ್ ಸಿದ್ದಪ್ಪ ಕಂಬಳಿ ಪುನಃ ಕರ್ನಾಟಕ ಪ್ರಾಂತ ರಚನೆಗೆ ಠರಾವು ಮಂಡಿಸಿದರಾದರೂ, 
>ಏಕೀಕರಣಕ್ಕೆ ಕನ್ನಡಿಗರ ಬೆಂಬಲವಿಲ್ಲ ಎಂಬ ಕಾರಣ ನೀಡಿ ಸರ್ಕಾರ ಠರಾವನ್ನು ತಿರಸ್ಕರಿಸಿತು.
>
>ಕೊನೆಗೆ ಮುಹೂರ್ತ ಕೂಡಿ ಬಂದಿದ್ದು 1938ರ ಮೇ ತಿಂಗಳ ಮೊದಲ ವಾರ. ಆಗ ನಡೆದ ಮುಂಬಯಿ ಶಾಸನ ಸಭೆ 
>ಕರ್ನಾಟಕ ಏಕೀಕರಣ ಗೊತ್ತುವಳಿಯನ್ನು ಸ್ವೀಕರಿಸಿತು. ಚರ್ಚೆಯಲ್ಲಿ ಪಾಲ್ಗೊಂಡಿದ್ದ ಬಿ. ಜಿ. 
>ಖೇರ್, ಸರ್ ಸಿದ್ದಪ್ಪ ಕಂಬಳಿ, ವಿ. ಎನ್. ಜೋಗ್ ಗೊತ್ತುವಳಿಯನ್ನು ಅನುಮೋದಿಸಿದರು. ಆದರೆ, 
>ಎರಡನೇ ಜಾಗತಿಕ ಯುದ್ಧ ಪ್ರಾರಂಭವಾಗಿದ್ದರಿಂದ ಭಾಷಾವಾರು ಪ್ರಾಂತ ರಚನೆ ಆಗಲಿಲ್ಲ.
>
>ಸಮಗ್ರ ಕರ್ನಾಟಕದ ಕನಸು
>1944ರಲ್ಲಿ ಧಾರವಾಡದಲ್ಲಿ ನಡೆದ 9ನೆಯ ಕರ್ನಾಟಕ ಏಕೀಕರಣ ಪರಿಷತ್ತು ಸಮಾವೇಶದಲ್ಲಿ 
>ಸ್ವಾಗತಾಧ್ಯಕ್ಷರಾಗಿದ್ದ ಎಸ್. ಎಸ್. ಮಳೀಮಠ್, ಕರ್ನಾಟಕ ಏಕೀಕರಣವೆಂದರೆ, ಬ್ರಿಟಿಷ್ ಕರ್ನಾಟಕ 
>ಪ್ರಾಂತಗಳಷ್ಟೇ ಅಲ್ಲ, ಸಂಸ್ಥಾನಗಳೂ ಸೇರಿದಂತೆ ಸಮಗ್ರ ಕರ್ನಾಟಕದ ಏಕೀಕರಣ ಎಂದು ಸಾರಿದರು.
>
>1946ರಲ್ಲಿ ದಾವಣಗೆರೆಯಲ್ಲಿ ನಡೆದ ಕರ್ನಾಟಕಸ್ಥರ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಮುಂಬಯಿ 
>ಆಧಿಪತ್ಯದ ಕೃಷಿ ಮಂತ್ರಿ ಎಂ. ಪಿ. ಪಾಟೀಲರು 'ಭಾರತಕ್ಕೆ ಸ್ವಾತಂತ್ರ್ಯವು ಹೇಗೋ ಹಾಗೆ 
>ಕರ್ನಾಟಕಕ್ಕೆ ಸ್ವಾಯತ್ತತೆ' ಎಂದು ಘೋಷಿಸಿದರು. ಕರ್ನಾಟಕ ಏಕೀಕರಣಕ್ಕೆ ಕೆಲವು ಸಂಸ್ಥಾನಿಕರು 
>ಅಡ್ಡಿಯಾಗಿದ್ದಾರೆ ಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ಬಳ್ಳಾರಿಯ ಕೋ. ಚೆನ್ನಬಸಪ್ಪ 
>'ಸಾಧ್ಯವಾದರೆ ಮೈಸೂರನ್ನು ಒಳಗೊಂಡು, ಅಗತ್ಯವಾದರೆ ಅದನ್ನು ಬಿಟ್ಟು ಕರ್ನಾಟಕ ಏಕೀಕರಣವಾಗಬೇಕು' 
>ಎಂಬ ಗೊತ್ತುವಳಿ ಮಂಡಿಸಿದರು. 
>
>ಆದರೆ, ಕೆಂಗಲ್ ಹನುಮಂತಯ್ಯನವರು 'ಮೈಸೂರನ್ನು ಒಳಗೊಂಡು ಕರ್ನಾಟಕ ರಾಜ್ಯ ನಿರ್ಮಾಣವಾಗಬೇಕು' 
>ಎಂದು ಗೊತ್ತುವಳಿಗೆ ತಿದ್ದುಪಡಿ ತಂದರು. ಗೊತ್ತುವಳಿಯನ್ನು ಜಾರಿಗೆ ತರಲು ಎಂ. ಪಿ. ಪಾಟೀಲ, 
>ಎಸ್. ನಿಜಲಿಂಗಪ್ಪ ಮತ್ತು ಕೆ. ಬಿ. ಜಿನರಾಜ ಹೆಗ್ಗಡೆ ಅವರಿದ್ದ ಸಮಿತಿ ರಚನೆಯಾಯಿತು.
>
>ಸ್ವತಂತ್ರ ರಾಜ್ಯದತ್ತ...
>1947ರ ಮುಂಬಯಿ ಶಾಸನ ಸಭೆಯಲ್ಲಿ ರೋಣದ ಅಂದಾನಪ್ಪ ದೊಡ್ಡಮೇಟಿ ಅವರು ಪ್ರತ್ಯೇಕ ಕರ್ನಾಟಕ 
>ಪ್ರಾಂತ್ಯ ರಚನೆಗೆ ಒತ್ತಾಯಿಸಿ ಖಾಸಗಿ ಗೊತ್ತುವಳಿ ಮಂಡಿಸಿದರು. ಕೆಲವು ತಿದ್ದುಪಡಿಗಳೊಂದಿಗೆ 
>ಗೊತ್ತುವಳಿಯು 60 ಮತಗಳನ್ನು ಪಡೆದು ಸ್ವೀಕೃತವಾಯಿತು. ವಿರುದ್ಧ ಬಂದದ್ದು ಕೇವಲ ಆರು ಮತಗಳು. 
>ಮದ್ರಾಸ್ ಶಾಸನ ಸಭೆಯಲ್ಲಿಯೂ ಡಾ. ಪಿ. ಸುಬ್ಬರಾಯನ್ ಭಾಷಾವಾರು ಪ್ರಾಂತ್ಯ ರಚನೆಯ ಸಂಬಂಧ 
>ಮಂಡಿಸಿದ ಗೊತ್ತುವಳಿ ಸ್ವೀಕೃತವಾಯಿತು.
>
>ಸ್ವತಂತ್ರ ಭಾರತದ ಸಂವಿಧಾನದ ರಚನೆಗೆ ಸೇರಿದ್ದ ಘಟನಾ ಸಮಿತಿಯ ಮೇಲೂ ಭಾಷಾವಾರು ಪ್ರಾಂತ್ಯ 
>ರಚನೆಗೆ ಒತ್ತಡ ಹೆಚ್ಚಿತು. ಅಂದಿನ ಘಟನಾ ಸಮಿತಿಯ ಸಭೆಯಲ್ಲೇ ಭಾಷಾವಾರು ಪ್ರಾಂತ್ಯ ರಚನೆ 
>ಕುರಿತು ವರದಿ ಸಿದ್ಧಪಡಿಸಲು ಉಪ ಸಮಿತಿಯೊಂದರ ರಚನೆಯಾಯಿತು.
>
>1947ರ ಆಗಸ್ಟ್ 15ರಂದು ಭಾರತ ಸ್ವತಂತ್ರವಾಯಿತು. ಆದರೆ, ಭಾರತ ಒಕ್ಕೂಟದ ಜೊತೆ ಮೈಸೂರು 
>ಸಂಸ್ಥಾನ ಸೇರ್ಪಡೆಯಾಗಿದ್ದು 1947ರ ಅಕ್ಟೋಬರ್ 24ರಂದು. ಹೈದರಾಬಾದ್ ಕರ್ನಾಟಕದ ಸೇರ್ಪಡೆ 
>1948ರ ಸೆಪ್ಟೆಂಬರ್ 17ರಂದು. 
>
>1948ರಲ್ಲಿ ಭಾಷಾವಾರು ಪ್ರಾಂತ್ಯ ರಚನೆಗೆ ಸಂಬಂಧಿಸಿದಂತೆ ವರದಿ ನೀಡಲು, ಅಲಹಾಬಾದ್ ಉಚ್ಚ 
>ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎಸ್. ಕೆ. ಧರ್ ಅಧ್ಯಕ್ಷತೆಯಲ್ಲಿ ಆಯೋಗ ನೇಮಿಸಿತ್ತು. 
>ಆದರೆ, ವರದಿ ಭಾಷಾವಾರು ಪ್ರಾಂತ್ಯ ರಚನೆ ವಿರುದ್ಧವಾಗಿ ಬಂತು. 
>
>ಕರ್ನಾಟಕ ಏಕೀಕರಣ ಪರಿಷತ್ತು
>ನ್ಯಾಯಮೂರ್ತಿ ಧರ್ ಆಯೋಗದ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾದ ಸಮಿತಿಯಲ್ಲಿದ್ದ 
>ಜವಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಪಟ್ಟಾಭಿರಾಮಯ್ಯ ಕೂಡಾ ಆಯೋಗದ 
>ಶಿಫಾರಸುಗಳನ್ನೇ ಎತ್ತಿ ಹಿಡಿದರು. ಇದನ್ನು ಖಂಡಿಸಿ ರಾಜ್ಯದ ಎಲ್ಲೆಡೆ ಸಭೆ, ಸಮಾರಂಭ ಮತ್ತು 
>ಸಮ್ಮೇಳನಗಳು ನಡೆದವು. ಕಾಂಗ್ರೆಸ್ ನಾಯಕರಿಂದ ಕರ್ನಾಟಕ ಏಕೀಕರಣ ಸಾಧ್ಯವಾಗದು ಎಂಬ 
>ಅಭಿಪ್ರಾಯದಿಂದ ಪಕ್ಷೇತರ ಕರ್ನಾಟಕ ಏಕೀಕರಣ ಪರಿಷತ್ತು ಸ್ಥಾಪಿತವಾಗಿ, ಏಕೀಕರಣಕ್ಕೆ ಹೊಸ 
>ತಿರುವು ಬಂದಿತು.
>
>ಈ ಮಧ್ಯೆ ಆಂಧ್ರ ಪ್ರಾಂತ ರಚನೆಗೆ ಒತ್ತಾಯಿಸಿ, 1951ರ ಆಗಸ್ಟ್‌ನಲ್ಲಿ ಪೊಟ್ಟಿ ಶ್ರೀರಾಮುಲು 
>ತಿರುಪತಿಯಲ್ಲಿ 37 ದಿನಗಳ ಉಪವಾಸ ಮಾಡಿದರು. ನಂತರ ಎರಡನೆಯ ಬಾರಿಗೆ ಆಮರಣಾಂತ ಉಪವಾಸಕ್ಕೆ 
>ಕೈಹಾಕಿದ ಪೊಟ್ಟಿ ಶ್ರೀರಾಮುಲು, 58 ದಿನಗಳ ಉಪವಾಸ ಮಾಡಿ ನಿಧನರಾದರು. ಇದರಿಂದ ಎಚ್ಚೆತ್ತ 
>ಲೋಕಸಭೆ, ಮದರಾಸ್ ನಗರವನ್ನು ಬಿಟ್ಟು ಆಂಧ್ರ ಪ್ರಾಂತ ರಚನೆಗೆ ನಿರ್ಧರಿಸಿತು. ಆಂಧ್ರ 
>ಪ್ರಾಂತಕ್ಕೆ ಸೇರಿಸಬೇಕೆಂಬ ವಾದ ಇದ್ದ ಬಳ್ಳಾರಿ ತಾಲ್ಲೂಕಿನ ಬಗ್ಗೆ ಸ್ಪಷ್ಟ ಅಭಿಪ್ರಾಯ 
>ಸಲ್ಲಿಸುವಂತೆ ರಾಷ್ಟ್ರಪತಿಗಳು ಹೈದರಾಬಾದ್‌ನ ಮುಖ್ಯ ನ್ಯಾಯಾಧೀಶ ಎಲ್. ಎಸ್. ಮಿಶ್ರಾ ಅವರಿಗೆ 
>ಜವಾಬ್ದಾರಿ ಕೊಟ್ಟಿತು. 
>
>ಆಂಧ್ರಕ್ಕಿಂತ ಕರ್ನಾಟಕದ ಪರ 90 ಮನವಿಗಳು ಹೆಚ್ಚಾಗಿ ಬಂದವು. ಜೊತೆಗೆ, ಕೊನೆಯ ಘಳಿಗೆಯಲ್ಲಿ 
>ಕರ್ನಾಟಕದ ಖ್ಯಾತ ಇತಿಹಾಸ ತಜ್ಞ ಆರ್. ಎಸ್. ಪಂಚಮುಖಿ ಅವರ ಅಭಿಪ್ರಾಯವೂ ರಾಜ್ಯದ ಪರವಾಗಿಯೇ 
>ಬಂದಿದ್ದರಿಂದ, ಬಳ್ಳಾರಿ ತಾಲ್ಲೂಕನ್ನು ಕರ್ನಾಟಕಕ್ಕೇ ಸೇರಿಸಲು ಮಿಶ್ರಾ ಶಿಫಾರಸು ಮಾಡಿದರು.
>
>ಹುಬ್ಬಳ್ಳಿ ಗೋಲಿಬಾರ್
>ಈ ಸಂದರ್ಭದಲ್ಲೇ, ಹುಬ್ಬಳ್ಳಿಯ ಸಮೀಪದ ಅದರಗುಂಚಿಯಲ್ಲಿ, ಶಂಕರಗೌಡ ಪಾಟೀಲರು 28-03-1953ರಂದು 
>ಕರ್ನಾಟಕ ಏಕೀಕರಣಕ್ಕೆ ಆಗ್ರಹಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದರು. 19-04-1953ರಂದು 
>ಹುಬ್ಬಳ್ಳಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸಮಿತಿಯ ಸಭೆ ನಡೆಯಲಿದ್ದ 
>ವಿಷಯ ತಿಳಿದ ಕರ್ನಾಟಕ ಏಕೀಕರಣ ಕಾರ್ಯಕರ್ತರು ಬೆಳಗಿನಿಂದಲೇ ಗುಳಕವ್ವನ ಕಟ್ಟೆ ಮೈದಾನದಲ್ಲಿ 
>ಗುಂಪುಗೂಡಿದರು. ಮೊದಮೊದಲು ಶಾಂತಿಯುತವಾಗಿದ್ದ ಪ್ರತಿಭಟನೆ ಕ್ರಮೇಣ ಉಗ್ರವಾಯಿತು. ಗುದ್ಲೆಪ್ಪ 
>ಹಳ್ಳಿಕೇರಿ ಅವರ ಜೀಪಿಗೆ ಬೆಂಕಿ ಹಚ್ಚಿದರು. ಪೊಲೀಸರ ನಿಯಂತ್ರಣ ತಪ್ಪಿದಾಗ ಲಾಠೀ ಚಾರ್ಜ್ 
>ಅಲ್ಲದೆ, ಗೋಲೀಬಾರ್ ಕೂಡಾ ಮಾಡಲಾಯಿತು. ಗಲಭೆಗೆ ಕಾರಣಕರ್ತರೆಂದು ಬಂಧಿತರಾದವರ ವಿಚಾರಣೆ 
>ನಡೆಯಿತು. ಆಗ ಸ್ಥಾನಬದ್ಧತಾ ಕಾನೂನಿನ ಅಡಿಯಲ್ಲಿ ಬಂಧಿತರಾಗಿದ್ದವರ ಪರ ವಾದಿಸಿದವರು ಮಾಜಿ 
>ಮುಖ್ಯಮಂತ್ರಿ ದಿ. ಎಸ್. ಆರ್. ಬೊಮ್ಮಾಯಿ. 
>
>ಏಕೀಕರಣಕ್ಕೆ ಹೆಚ್ಚಿದ ಒತ್ತಡ
>ಹುಬ್ಬಳ್ಳಿ ಗಲಭೆಯ ನಂತರ, ಮಿಶ್ರಾ ವರದಿ ಸ್ವೀಕೃತವಾಗಿ ಆಂಧ್ರ ಪ್ರದೇಶದ ರಚನೆ ಖಚಿತವಾಯಿತು. 
>ಕಾಂಗ್ರೆಸ್ ನಾಯಕರನ್ನೇ ನಂಬಿ ಕೂತರೆ ಕರ್ನಾಟಕ ಏಕೀಕರಣ ಸಾಧ್ಯವಿಲ್ಲ ಎಂಬ ಅಭಿಪ್ರಾಯವಿದ್ದ 
>ಕಾಂಗ್ರೆಸ್ಸೇತರ ಪಕ್ಷದ ಕೆಲವು ಮುಖಂಡರು 28-05-1953ರಂದು ದಾವಣಗೆರೆಯಲ್ಲಿ ಸಭೆ ಸೇರಿ, 
>'ಕರ್ನಾಟಕ ರಾಜ್ಯ ನಿರ್ಮಾಣ ಮಾಡುವುದು ಕನ್ನಡಿಗರ ಜನ್ಮಸಿದ್ಧ ಹಕ್ಕು' ಎಂಬ ಘೋಷಣೆಯೊಂದಿಗೆ, 
>ಮಾಜಿ ಸಂಸದ ದಿ. ಅಳವಂಡಿ ಶಿವಮೂರ್ತಿ ಸ್ವಾಮಿ ಮತ್ತು ಕೆ. ಆರ್. ಕಾರಂತರ ನೇತೃತ್ವದಲ್ಲಿ 'ಅಖಂಡ 
>ಕರ್ನಾಟಕ ರಾಜ್ಯ ನಿರ್ಮಾಣ ಪರಿಷತ್ತು' ಎಂಬ ಸಂಸ್ಥೆಯನ್ನು ಹುಟ್ಟುಹಾಕಿದರು. ಏಕೀಕರಣ 
>ಹೋರಾಟಕ್ಕೆ ಜನಾಂದೋಲನದ ಸ್ವರೂಪ ನೀಡುವಲ್ಲಿ ಪರಿಷತ್ತು ಯಶ್ವಸಿಯಾಯಿತು. 1953ರ ಅಕ್ಟೋಬರ್ 
>ಒಂದರಂದು ಆಂಧ್ರಪ್ರದೇಶ ರಚನೆಯಾದ ಸಂದರ್ಭದಲ್ಲೇ ಬಳ್ಳಾರಿ ಜಿಲ್ಲೆ ಮೈಸೂರು ಸಂಸ್ಥಾನದಲ್ಲಿ 
>ವಿಲೀನಗೊಂಡಿತು.
>
>ಕರ್ನಾಟಕ ಏಕೀಕರಣಕ್ಕಾಗಿ ಜನಾಂದೋಲನ ಹೆಚ್ಚಿದಾಗ, ಕೇಂದ್ರ ಸರ್ಕಾರ 29-12-1953ರಂದು ರಚಿಸಿದ್ದ 
>ಫಜಲ್ ಆಲಿ ನೇತೃತ್ವದ ರಾಜ್ಯ ಪುನರ್ವಿಂಗಡಣಾ ಆಯೋಗ ಕರ್ನಾಟಕ ರಾಜ್ಯ ರಚನೆಯ ಅಗತ್ಯತೆಯನ್ನು 
>ಎತ್ತಿ ಹಿಡಿಯಿತು. ಅದರ ಕರಡು ವರದಿಯಲ್ಲಿ ಇಡಿಯಾಗಿ ಬಳ್ಳಾರಿ ಜಿಲ್ಲೆಯನ್ನು ಆಂಧ್ರಕ್ಕೆ 
>ಸೇರಿಸಲು ಶಿಫಾರಸು ಮಾಡಿತ್ತು. ಅದನ್ನು ವಿರೋಧಿಸಿ, ಬಳ್ಳಾರಿ ಜಿಲ್ಲೆಯಾದ್ಯಂತ ತುಂಗಭದ್ರಾ ನದಿ 
>ನೀರು ಹೋರಾಟ ನಡೆಯಿತು. ರಾಜ್ಯ ಪುನರ್ವಿಂಗಡಣಾ ಆಯೋಗವು ಹಿಂದಿನ ವರದಿಗಳನ್ನು ಪರಿಶೀಲಿಸಿ, ಬಂದ 
>ಸಾವಿರಗಟ್ಟಲೆ ಮನವಿಗಳ ಅಧ್ಯಯನ ಮಾಡಿ, ಕೇಂದ್ರ ಸರ್ಕಾರಕ್ಕೆ 1955ರ ಅಕ್ಟೋಬರ್ 10ರಂದು ತನ್ನ 
>ವರದಿಯನ್ನು ಸಲ್ಲಿಸಿತು.
>
>ರಾಜ್ಯ ಪುನರ್ವಿಂಗಡಣಾ ಆಯೋಗದ ವರದಿಯ ಬಗ್ಗೆ ಸಂಸತ್ತು 1956ರ ಜನವರಿ 19ರಂದು ಚರ್ಚಿಸಿ, 1956ರ 
>ಮಾರ್ಚ್ 19ರಂದು ವಿಧೇಯಕ ಪ್ರಕಟಿಸಿತು. ಅದರ ಪ್ರಕಾರ 1956ರ ನವೆಂಬರ್ 1ರಂದು ಕರ್ನಾಟಕ (ಆಗ 
>ಮೈಸೂರು) ರಾಜ್ಯ ಅಸ್ತಿತ್ವಕ್ಕೆ ಬರಲಿತ್ತು. ಆಗ ಈ ಪ್ರದೇಶಗಳು ಹೊಸ ರಾಜ್ಯದಲ್ಲಿ 
>ಸೇರ್ಪಡೆಯಾಗಬೇಕಿತ್ತು: 
>
>1. ಇಡಿಯಾಗಿ ಮೈಸೂರು ರಾಜ್ಯ.
>2. ಮುಂಬಯಿ ರಾಜ್ಯದ ಬಿಜಾಪುರ, ಧಾರವಾಡ, ಉತ್ತರ ಕನ್ನಡ ಮತ್ತು ಬೆಳಗಾವಿ (ಚಾಂದಘಡ 
>ತಾಲ್ಲೂಕನ್ನು ಬಿಟ್ಟು) ಜಿಲ್ಲೆಗಳು.
>3. ಹೈದರಾಬಾದ್ ರಾಜ್ಯದ ಗುಲಬರ್ಗಾ ಜಿಲ್ಲೆ (ಕೊಡಂಗಲ್ ಮತ್ತು ತಾಂಡೂರು ತಾಲ್ಲೂಕುಗಳನ್ನು 
>ಬಿಟ್ಟು), ರಾಯಚೂರು ಜಿಲ್ಲೆ (ಆಲಂಪುರ ಮತ್ತು ಗದ್ವಾಲ್ ತಾಲ್ಲೂಕುಗಳನ್ನು ಬಿಟ್ಟು) ಮತ್ತು 
>ಬೀದರ್ ಜಿಲ್ಲೆಯ ಬೀದರ್, ಭಾಲ್ಕಿ, ಔರಾದ್ (ಸಂತಪುರ) ಮತ್ತು ಹುಮನಾಬಾದ್ ತಾಲ್ಲೂಕುಗಳು.
>4. ಮದ್ರಾಸ್ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ (ಕಾಸರಗೋಡು ತಾಲ್ಲೂಕು ಮತ್ತು ಅಮೀನ್ 
>ದ್ವೀಪಗಳನ್ನು ಬಿಟ್ಟು) ಮತ್ತು ಕೊಯಮತ್ತೂರು ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು.
>5. ಕೊಡಗು ರಾಜ್ಯ.
>
>ಈಡೇರಿದ ಕನಸು
>ವಿಜಯನಗರ ಕಾಲದವರೆಗೂ ದೊಡ್ಡ ಸಾಮ್ರಾಜ್ಯವಾಗಿದ್ದ ಕರುನಾಡು ಟಿಪ್ಪು ಸುಲ್ತಾನ್‌ನ ಮರಣದ ನಂತರ 
>ಬ್ರಿಟಿಷರ ಒಡೆದು ಆಳುವ ನೀತಿಯಿಂದ ಹಲವಾರು ಪ್ರಾಂತ್ಯಗಳಾಗಿ ವಿಭಜನೆಯಾಗಿ ವಿವಿಧ ಭಾಷೆಗಳ 
>ಪ್ರಾಂತ್ಯಗಳಲ್ಲಿ ಇಲ್ಲವಾಗಿತ್ತು. ಈಗ ಕನ್ನಡಿಗರನ್ನೊಳಗೊಂಡ ಪ್ರತ್ಯೇಕ ರಾಜ್ಯ ಅಸ್ತಿತ್ವಕ್ಕೆ 
>ಬರುತ್ತದೆಂಬ ಸಂತಸದ ಜೊತೆಗೆ, ಇದಕ್ಕಾಗಿ ಹೋರಾಡಿದ ಹಿರಿಯ ಜೀವಗಳು ಹಂಬಲಿಸಿದಂತೆ, ಪೂರ್ತಿ 
>ಏಕೀಕರಣ ಸಾಧ್ಯವಾಗಲಿಲ್ಲ. 
>
>ಏಕೆಂದರೆ, ಕಾಸರಗೋಡು ಕೈಬಿಟ್ಟಿತ್ತು. ಅಕ್ಕಲಕೋಟೆ, ಸೊಲ್ಲಾಪುರಗಳು ಹೊರಗೇ ಉಳಿದಿದ್ದವು. 
>ನೀಲಗಿರಿ ಕೂಡಾ ದಕ್ಕಲಿಲ್ಲ. ಏಕೀಕರಣದ ನಂತರವೂ ಪ್ರಾಚೀನ ಕಾಲದಿಂದ ಇದ್ದ ಕರ್ನಾಟಕ ಎಂಬ ಹೆಸರಿನ 
>ಬದಲಾಗಿ ಮೈಸೂರು ರಾಜ್ಯವೆಂದು ಕರೆಯಲ್ಪಟ್ಟಿತು. ಕೊನೆಗೂ, ಸಾಕಷ್ಟು ಒತ್ತಡದ ನಂತರ, 1973 
>ನವೆಂಬರ್ 1ರಂದು ರಾಜ್ಯಕ್ಕೆ ಕರ್ನಾಟಕ ಎಂದು ಪುನರ್ ನಾಮಕರಣ ಮಾಡಲಾಯಿತು.
>
>ಏನೇ ಆದರೂ, ಬೇರೆ ಬೇರೆ ಪ್ರಾಂತಗಳಲ್ಲಿ ಹಂಚಿಹೋಗಿದ್ದ ಕನ್ನಡಿಗರು 1956ರ ನವೆಂಬರ್ 1ರಂದು 
>ಒಂದೇ ರಾಜ್ಯದ ಆಡಳಿತ ವ್ಯಾಪ್ತಿಗೆ ಬಂದಿದ್ದು ಒಂದು ಐತಿಹಾಸಿಕ ಹೋರಾಟದ ಫಲ. ಎರಡು ಸಾವಿರ 
>ವರ್ಷಗಳ ಇತಿಹಾಸ ಹೊಂದಿರುವ ಕರ್ನಾಟಕ ಶತಮಾನಗಳ ಸಂಕೋಲೆ ಕಳೆದುಕೊಂಡು ಎಲ್ಲ ರೀತಿಯಿಂದ 
>ಒಂದಾಯಿತು. ಏಕೀಕರಣದ ಕನಸು ಈಡೇರುವ ಮೂಲಕ, ಕನ್ನಡಿಗರ ಭಾವನಾತ್ಮಕವಾಗಿಯೂ ಒಂದಾದರು. 
>ಸಾಂಸ್ಕೃತಿಕ ಐಕ್ಯತೆಗೂ ಇಂಬು ದೊರೆಯಿತು. 
>
>ಇಂಥದೊಂದು ಕನಸನ್ನು ನನಸು ಮಾಡಲು ಹೋರಾಡಿದ ಎಲ್ಲರ ತ್ಯಾಗ ಮತ್ತು ಬಲಿದಾನದ ಫಲ ಈ ನಮ್ಮ 
>ಹೆಮ್ಮೆಯ ಕರ್ನಾಟಕ. ಆ ಸ್ಫೂರ್ತಿ ಅಳಿಯದಿರಲಿ. ಸಮೃದ್ಧ ಹಾಗೂ ಸ್ವಾವಲಂಬಿ ಕರ್ನಾಟಕ ಬೇಗ 
>ಮೈದಾಳಲಿ. 
>
>ಸಿರಿಗನ್ನಡಂಗೆಲ್ಗೆ!
>
>ಲೇಖಕರ ಕಿರುಪರಿಚಯ
>      ಶ್ರೀ ಚಾಮರಾಜ ಸವಡಿ 
>
>ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ಸುದ್ದಿ ಸಂಪಾದಕರಾಗಿರುವ ಇವರು ಹುಟ್ಟಿ ಬೆಳೆದದ್ದು 
>ಕೊಪ್ಪಳ ಜಿಲ್ಲೆಯ ಅಳವಂಡಿಯಲ್ಲಿ. ಹಾಯ್‌ ಬೆಂಗಳೂರ್‌, ವಿಜಯ ಕರ್ನಾಟಕ, ಈಟಿವಿ ಕನ್ನಡ, 
>ಪ್ರಜಾವಾಣಿ, ಸುವರ್ಣ ನ್ಯೂಸ್‌, ಸಮಯ ನ್ಯೂಸ್‌, ಟಿವಿ9 ನಲ್ಲಿ ಕೆಲಸ ಮಾಡಿದರುವ ಇವರು ಸದ್ಯ 
>ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
>
>Blog  |  Facebook  |  Twitter
>ಹಂಚಿ
>
>ಕಾಮೆಂಟ್‌ಗಳಿಲ್ಲ:
>ಕಾಮೆಂಟ್‌‌ ಪೋಸ್ಟ್‌ ಮಾಡಿ
>‹
>›
>ಮುಖಪುಟ
>ವೆಬ್‌ ಆವೃತ್ತಿಯನ್ನು ವೀಕ್ಷಿಸಿ
>This site uses cookies from Google to deliver its services, to personalise ads 
>and t
>
>-- 
>*For doubts on Ubuntu and other public software, visit 
>http://karnatakaeducation.org.in/KOER/en/index.php/Frequently_Asked_Questions
> 
>**Are you using pirated software? Use Sarvajanika Tantramsha, see 
>http://karnatakaeducation.org.in/KOER/en/index.php/Public_Software ಸಾರ್ವಜನಿಕ 
>ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>***If a teacher wants to join STF-read 
>http://karnatakaeducation.org.in/KOER/en/index.php/Become_a_STF_groups_member
>--- 
>You received this message because you are subscribed to the Google Groups 
>"KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>To unsubscribe from this group and stop receiving emails from it, send an 
>email to [email protected].
>To post to this group, send email to [email protected].
>Visit this group at https://groups.google.com/group/kannadastf.
>To view this discussion on the web, visit 
>https://groups.google.com/d/msgid/kannadastf/CAD2E_f3poi4RNSroL8KpgVquE_Vy2%3Da1s%3Dq04Z_e2sy7t1RNQA%40mail.gmail.com.
>For more options, visit https://groups.google.com/d/optout.

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
Visit this group at https://groups.google.com/group/kannadastf.
To view this discussion on the web, visit 
https://groups.google.com/d/msgid/kannadastf/duv3pnry7xrx72f9rnrg7pk7.1477666281708%40email.android.com.
For more options, visit https://groups.google.com/d/optout.

Reply via email to